ಬೆಂಗಳೂರು: ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡಕಮ್ಮನಹಳ್ಳಿಯಲ್ಲಿ ಪತಿಯೇ ಪತ್ನಿಯನ್ನು ಕೊಂದು ಆಕೆಯ ದೇಹವನ್ನು ತುಂಡರಿಸಿ ಸೂಟ್ ಕೇಸ್ಗೆ ತುಂಬಿರುವ ಭೀಕರ ಘಟನೆ ಸಂಭವಿಸಿದೆ.
ಆರೋಪಿ ಪತಿ ರಾಕೇಶ್ ಎಂಬಾತ ಮಹಾರಾಷ್ಟ್ರ ಮೂಲದವನಾಗಿದ್ದು ಪತ್ನಿ ಗೌರಿ ಅನಿಲ್ ಸಾಂಬೆಕರ್(32)ರನ್ನು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಬಳಿಕ ಈ ವಿಚಾರವನ್ನು ಆಕೆಯ ಪೋಷಕರಿಗೆ ಕರೆ ಮಾಡಿ ಹೇಳಿದ್ದು, ಪೋಷಕರು ಮಹಾರಾಷ್ಟ್ರ ಪೊಲೀಸರ ನೆರವು ಕೋರಿದ್ದಾರೆ.
ರಾಕೇಶ್ ಹಾಗೂ ಗೌರಿ 2 ವರ್ಷಗಳ ಹಿಂದೆ ಮದುವೆಯಾಗಿದ್ದು ಒಂದು ತಿಂಗಳ ಹಿಂದಷ್ಟೆ ದೊಡ್ಡಕಮ್ಮನಹಳ್ಳಿಯಲ್ಲಿ ಮನೆ ಪಡೆದು ವಾಸವಿದ್ದರು. ಇಬ್ಬರೂ ಸಹ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಪ್ರಸ್ತುತ ಮನೆಯಿಂದಲೇ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಮಹಾರಾಷ್ಟ್ರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಹುಳಿಮಾವು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಮನೆಯ ಬಾತ್ ರೂಮ್ನಲ್ಲಿ ಸೂಟ್ ಕೇಸ್ನಲ್ಲಿ ಗೌರಿಯ ಮೃತದೇಹ ಪತ್ತೆಯಾಗಿದ್ದು ಆರೋಪಿ ರಾಕೇಶ್ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.